ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಪದವಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮತ್ತು ಮೂಲ ವಿಜ್ಞಾನದಲ್ಲಿ ಆಸಕ್ತಿ ಹುಟ್ಟಿಸುವ ಉದ್ದೇಶದೊಂದಿಗೆ ನಾವು ಮನೆಯಲ್ಲಿ ದಿನನಿತ್ಯ ಉಪಯೋಗಿಸುವ ವಿವಿಧ ವಸ್ತುಗಳನ್ನು ತಯಾರಿಸುವ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಾಗಾರದಲ್ಲಿ ನಾವು ದೈನಂದಿನ ಜೀವನದಲ್ಲಿ ಉಪಯೋಗಿಸುವ ವಸ್ತುಗಳಾದ ಟೂತ್ ಪೌಡರ್, ಸೋಪು, ಲಿಕ್ವಿಡ್ ಸೋಪು, ಡಿಟರ್ಜೆಂಟ್ ಪೌಡರ್, ನೋವು ನಿವಾರಕ ಕ್ರೀಮ್ಗಳು, ಫಿನೈಲ್, ಇತ್ಯಾದಿ ವಸ್ತುಗಳನ್ನು ತಯಾರಿಸಲು ಬೇಕಾಗುವ ಕಚ್ಚಾವಸ್ತುಗಳು ಮತ್ತು ತಯಾರಿಕಾ ವಿಧಾನಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ರಸಾಯನ ಶಾಸ್ತ್ರ ಪ್ರಯೋಗಾಲಯದಲ್ಲಿ ಅವುಗಳನ್ನು ತಯಾರಿಸಿ ತೋರಿಸಲಾಯಿತು.
ಪ್ರೌಢಶಾಲೆಯ ವಿದ್ಯಾರ್ಥಿಗಳಿಂದಲೇ ಕೆಲವು ವಸ್ತುಗಳನ್ನು ತಯಾರಿಸಲು ಉತ್ತೇಜಿಸಲಾಯಿತು. ಕಾಲೇಜಿನ ವಿಜ್ಞಾನ ಪದವಿಯ ರಸಾಯನ ಶಾಸ್ತ್ರದ ವಿದ್ಯಾರ್ಥಿಗಳು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರೌಢಶಾಲೆಯ ಸುಮಾರು 50 ವಿದ್ಯಾರ್ಥಿಗಳು ಕುತೂಹಲದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ಪದವಿ ವಿದ್ಯಾರ್ಥಿಗಳಿಂದ ತಮ್ಮ ಸಂದೇಹಗಳಿಗೆ ಸೂಕ್ತ ಪರಿಹಾರ ಪಡೆದುಕೊಂಡರು.
ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಶ್ವನಾಥ ಪಿ. ಇವರು ಕಾರ್ಯಾಗಾರದ ಉದ್ದೇಶ ಹಾಗೂ ಪ್ರಾಮುಖ್ಯತೆಯನ್ನು ವಿವರಿಸಿದರು. ಉಪನ್ಯಾಸಕ ಡಾ. ರಾಜೇಶ ನ ಹೆಗಡೆ ಸಂಯೋಜಿಸಿದ ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ನಂದಾಕುಮಾರಿ ಕೆ. ಪಿ., ದಿವ್ಯ, ಗಾನವಿ, ಸಂಗೀತ ಬಿ., ಮತ್ತು ಡಾ. ನಾರಾಯಣ ಹೆಬ್ಬಾರ್ ಸಹಕರಿಸಿದರು.
(ಉಪಯುಕ್ತ ನ್ಯೂಸ್)
ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ